ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ಈ ಯೋಜನೆಗೆ ಅಧಿಸೂಚನೆ ಹೊರಡಿಸುತ್ತಿಲ್ಲ. ನೆರೆ ರಾಜ್ಯಗಳು ದಾವೆಗಳ ಮೂಲಕ ಯೋಜನೆ ಜಾರಿಗೆ ಅಡಚಣೆ ಉಂಟು ಮಾಡುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು.
ವಿಜಯಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.
“ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದು ಚುನಾವಣೆ ಪ್ರಚಾರದ ವೇಳೆ ನಾನು ಹೇಳಿದ್ದೆ. ಈ ಕೈಗೆ ಅಧಿಕಾರ ಸಿಕ್ಕಿದ ಕಾರಣಕ್ಕೆ ಇಂದು ದೊಡ್ಡ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ನಿಮ್ಮ ಜಿಲ್ಲೆಯಲ್ಲಿ ಕೃಷ್ಣ ಜಲಭಾಗ್ಯ ನಿಗಮದಲ್ಲಿ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆದ್ಯತೆ ನೀಡಲಾಗಿದೆ. ನಾನು ಸಚಿವನಾದ ಬಳಿಕ 3,700 ಕೋಟಿ ಕೆಲಸವನ್ನು ಈ ಜಿಲ್ಲೆಗೆ ಮಂಜೂರು ಮಾಡಿದ್ದೇವೆ. 1.19 ಲಕ್ಷ ಹೆಕ್ಟೇರ್ ಭೂಮಿಗೆ ನೀರಾವರಿ ಸಲ್ಲಿಸಲಾಗಿದೆ. ಯುಕೆಪಿ 3ನೇ ಹಂತದಲ್ಲಿ ನಿಮಗೆ 80 ಟಿಎಂಸಿ ನೀರು ಲಭ್ಯವಾಗುತ್ತದೆ. ಈ ಯೋಜನೆಗೆ ಅಧಿಸೂಚನೆ ಹೊರಡಿಸಿ ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುತ್ತಿಲ್ಲ. ನೆರೆ ರಾಜ್ಯಗಳು ನಮ್ಮ ಮೇಲೆ ದಾವೆ ಹೂಡಿ ಅಡ್ಡಪಡಿಸುತ್ತಿವೆ. ಆದರೂ ಕೆರೆಗಳನ್ನು ತುಂಬಿಸುವ ಮೂಲಕ ಸಾವಿರಾರು ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಈ ಭಾಗದಲ್ಲಿ 21 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಮಾಡಲಾಗುತ್ತಿದೆ” ಎಂದು ತಿಳಿಸಿದರು.

ನೆರೆ ರಾಜ್ಯಗಳಿಂದ ದಾವೆಗಳ ಮೂಲಕ ಅಡಚಣೆ
ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ
ಸರ್ವರಿಗೂ ಸಮಬಾಳು, ಸಮಪಾಲು ತತ್ವದ ಮೇಲೆ ಕೆಲಸ
ಗುಣಮಟ್ಟದ ಶಿಕ್ಷಣ, ಉದ್ಯೋಗ ಸೃಷ್ಟಿಗೆ ಆದ್ಯತೆ
ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ನುಡಿದಂತೆ ನಡೆದಿದೆ. ಇಂತಹ ತೀರ್ಮಾನವನ್ನು ದೇಶದಲ್ಲಿ ಬೇರೆ ಯಾವುದೇ ಸರ್ಕಾರ ಮಾಡಿಲ್ಲ” ಎಂದು ತಿಳಿಸಿದರು.








